
ಶಿವಮೊಗ್ಗ : ನಗರದ ಹಳೇ ತುಂಗಾ ಸೇತುವೆಯ ಜಾಗದಲ್ಲಿ ಹೊಸ ಸೇತುವೆಯನ್ನು ನಿರ್ಮಿಸುವುದು ಅತ್ಯಂತ ತುರ್ತು ಅಗತ್ಯವಾಗಿದ್ದು, ಇದಕ್ಕೆ ರೂ.40 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಶಿವಮೊಗ್ಗ ನಗರದಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಕ್ಕೆ ಭಾನುವಾರ ನಗರಕ್ಕೆ ಆಗಮಿಸಿದ್ದಲೋಕೋಪಯೋಗಿ ಹಾಗೂ ಒಳನಾಡು ಜಲ ಸಾರಿಗೆ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಶಾಸಕರು, ನಗರದ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಾರಿಗೆ ವ್ಯವಸ್ಥೆಯ ಹಿತದೃಷ್ಟಿಯಿಂದ, ಹಳೆಯ ತುಂಗಾ ಸೇತುವೆಯ ಜಾಗದಲ್ಲಿ ಹೊಸ ಸೇತುವೆಯನ್ನು ನಿರ್ಮಿಸುವುದು ಅತ್ಯಂತ ತುರ್ತು ಅಗತ್ಯವಾಗಿದೆ ಎನ್ನುವುದನ್ನು ಮನವರಿಕೆ ಮಾಡಿಕೊಟ್ಟರು. ಅದೇ ವೇಳೆ ಈ ಸೇತುವೆ ನಿರ್ಮಾಣಕ್ಕೆ ರೂ.40 ಕೋಟಿ ಅನುದಾನದ ಅಗತ್ಯವಿದ್ದು, ಅದನ್ನು ಬಿಡುಗಡೆ ಮಾಡಿಸುವಂತೆ ಮನವಿ ಸಲ್ಲಿಸಿದರು.
ಹಳೇ ಸೇತುವೆ ಶಿಥಿಲಗೊಂಡಿ ರುವುದರಿಂದ ಸಾರ್ವಜನಿ ಕರಿಗೆ ಮಳೆಗಾಲದಲ್ಲಿ ಆತಂಕ ಎದುರಾಗಿದೆ. ನಗರದ ಸರ್ವತೋಮುಖ ಅಭಿವೃದ್ಧಿಗೆ ಆಧುನಿಕ ಮೂಲಸೌಕರ್ಯಗಳು ಅವಶ್ಯಕ ವಾಗಿದ್ದು, ಸಚಿವರು ಈ ಯೋಜನೆಗೆ ಪೂರಕವಾಗಿ ಸ್ಪಂದಿಸಿದ್ದಾರೆ. ಶೀಘ್ರದಲ್ಲೇ ಅನುದಾನ ಬಿಡುಗಡೆಯಾಗಿ ಕಾಮಗಾರಿ ಆರಂಭವಾಗುವ ವಿಶ್ವಾಸವಿದೆ.
|ಎಸ್.ಎನ್. ಚನ್ನಬಸಪ್ಪ, ಶಾಸಕರು

ಲೋಕೋಪಯೋಗಿ ಇಲಾಖೆ ಸಿದ್ಧಪಡಿಸಿರುವ ವರದಿಯಂತೆ, ಈ ನೂತನ ಸೇತುವೆ ನಿರ್ಮಾಣಕ್ಕೆ ಅಂದಾಜು ರೂ. 40 ಕೋಟಿ ವೆಚ್ಚ ತಗುಲುತ್ತಿದ್ದು, ಇದರ ಸಂಪೂರ್ಣ ಪ್ಲಾನ್ ಮತ್ತು ಅಂದಾಜು ಪಟ್ಟಿಯನ್ನು ಸಚಿವರಿಗೆ ಹಸ್ತಾಂತರಿಸಲಾಗಿದೆ. ಸೇತುವೆಯು ನಗರದ ಆಯಕಟ್ಟಿನ ಭಾಗಗಳನ್ನು ಸಂಪರ್ಕಿಸುವುದರಿಂದ, ಯಾವುದೇ ವಿಳಂಬವಿಲ್ಲದೆ ತಾಂತ್ರಿಕ ಅನುಮೋದನೆ ಮತ್ತು ಆರ್ಥಿಕ ನೆರವು ನೀಡುವಂತೆ ಮತ್ತೊಮ್ಮೆ ಒತ್ತಾಯಿಸಲಾಗಿದೆ ಎಂದು ಶಾಸಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಳೆಯ ಸೇತುವೆಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಕಳೆದ ಜೂನ್ (2025) ತಿಂಗಳಿನಲ್ಲಿಯೇ ಸಚಿವರನ್ನು ಭೇಟಿಯಾಗಿ ಪ್ರಾಥಮಿಕ ಮನವಿ ಸಲ್ಲಿಸಲಾಗಿತ್ತು. ಅದರ ಭಾಗವಾಗಿಯೇ ಶಿವಮೊಗ್ಗಕ್ಕೆ ಆಗಮಿಸಿದ ಸಂದರ್ಭದಲ್ಲಿ ಸಚಿವರು ಖುದ್ದಾಗಿ ಸೇತುವೆಯ ಸ್ಥಿತಿಗತಿಯನ್ನು ವೀಕ್ಷಿಸಿದರು ಎಂಬುದಾಗಿಯೂ ಶಾಸಕರು ತಿಳಿಸಿದ್ದಾರೆ.

ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜ್ಞಾನೇಶ್ವರ್, ನಾಗರಾಜ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ದೀನ್ ದಯಾಳ್, ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರಭಾಕರ್ ಪಿ, ಪ್ರಮುಖರಾದ ಲಕ್ಷ್ಮಣ, ಶ್ರೀನಾಗ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.