
ಶಿವಮೊಗ್ಗ : ನಾಗರಿಕರ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಯೋಗದ ಪಾತ್ರ ದೊಡ್ಡದಾಗಿದ್ದು, ಶರಾವತಿ ನಗರದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ನೂತನ ಯೋಗ ಭವನವು ಸಾರ್ವಜನಿಕರ ಬಳಕೆಗೆ ಶೀಘ್ರದಲ್ಲೇ ಮುಕ್ತವಾಗಲಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ರೆಡ್ ಅಲರ್ಟ್, ಎರಡು ದಿನಗಳ ಕಾಲ ಭಾರೀ ಮಳೆ, ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಇಂದು ಬೆಳಿಗ್ಗೆ ಶರಾವತಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಯೋಗ ಭವನಕ್ಕೆ ಭೇಟಿ ನೀಡಿದ ಶಾಸಕರು, ಕಟ್ಟಡದ ಅಂತಿಮ ಹಂತದ ಸಿದ್ಧತೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು.
ಭವನದ ಪ್ರಮುಖ ನಾಗರೀಕ ಕಾಮಗಾರಿಗಳು ಪೂರ್ಣಗೊಂಡಿದ್ದು, ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ಅಂತಿಮ ಹಂತದ ಕೆಲಸಗಳು ಬಾಕಿ ಇವೆ. ಈ ಬಾಕಿ ಕೆಲಸಗಳನ್ನು ಶೀಘ್ರದಲ್ಲಿ ಮುಗಿಸಿ, ಪ್ರಸಕ್ತ ವಾರಾಂತ್ಯದ ಒಳಗಾಗಿ ಯೋಗ ಭವನವನ್ನು ಲೋಕಾರ್ಪಣೆಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ನಿರ್ಮಾಣ ಸಂಸ್ಥೆಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
– ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗ ನಗರ ಶಾಸಕರು

ಅಂಗನವಾಡಿ ಕೇಂದ್ರಕ್ಕೆ ಭೇಟಿ :
ಇದೇ ಸಂದರ್ಭದಲ್ಲಿ ಯೋಗ ಭವನದ ಪಕ್ಕದಲ್ಲೇ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಅಂಗನವಾಡಿ ಕೇಂದ್ರಕ್ಕೆ ಶಾಸಕರು ದಿಢೀರ್ ಭೇಟಿ ನೀಡಿದರು. ಕೇಂದ್ರದ ಭೌತಿಕ ಸ್ಥಿತಿಗತಿ, ಸ್ವಚ್ಛತೆ ಹಾಗೂ ಮಕ್ಕಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ವೀಕ್ಷಿಸಿದ ಅವರು, ಮಕ್ಕಳಿಗೆ ಗುಣಮಟ್ಟದ ಆರಂಭಿಕ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಯಾವುದೇ ಲೋಪವಾಗದಂತೆ ಜಾಗ್ರತೆ ವಹಿಸಲು ಸಿಬ್ಬಂದಿಗೆ ಸೂಚಿಸಿದರು.
ಈ ಪರಿಶೀಲನಾ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಇಲಾಖೆಯ ಅಧಿಕಾರಿಗಳು ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.
ಇದನ್ನೂ ಓದಿ » ಮಕ್ಕಳಿಂದ ಗಿಡ ನೆಡುವ ಮೂಲಕ ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯಿಂದ ಅರ್ಥಪೂರ್ಣ ವಿಶ್ವ ಪರಿಸರ ದಿನ ಸಂಭ್ರಮ