
ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಯಾವುದೇ ಕಾರಣಕ್ಕೂ ಅರ್ಹ ಮಹಿಳೆಯರ ಹೆಸರುಗಳನ್ನು ತೆಗೆದುಹಾಕುವುದಿಲ್ಲ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ » ಹುಲಿಕಲ್ ಘಾಟ್ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ
ಈ ಕುರಿತು ಹರಡುತ್ತಿರುವುದೆಲ್ಲಾ ಸುಳ್ಳು ಸುದ್ದಿ ಹಾಗೂ ಅಪಪ್ರಚಾರವಾಗಿದ್ದು, ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ ಎಂದು ಅವರು ಮನವಿ ಮಾಡಿದ್ದಾರೆ. ಯೋಜನೆಯ ಹಣ ದುರ್ಬಳಕೆಯಾಗುತ್ತಿರುವುದನ್ನು ತಡೆಯಲು ಮತ್ತು ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸಲು ಸರ್ಕಾರ ಈಗ ಪರಿಶೀಲನಾ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿದೆ. ಜಿಲ್ಲೆಯಲ್ಲಿ ನಡೆಸಿರುವ ಪ್ರಾಥಮಿಕ ಪರಿಶೀಲನೆಯಲ್ಲಿ ಕೆಲವು ಮುಖ್ಯ ಅಂಶಗಳು ಬೆಳಕಿಗೆ ಬಂದಿವೆ :
ಮೃತರ ಹೆಸರಿನಲ್ಲಿ ಹಣ ಬಿಡುಗಡೆ : ಶಿವಮೊಗ್ಗ ಜಿಲ್ಲೆಯಲ್ಲಿ 388029 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದ ಸುಮಾರು 8,114ಕ್ಕೂ ಹೆಚ್ಚು ಕುಟುಂಬದ ಯಜಮಾನಿಯರು ಮರಣ ಹೊಂದಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಅವರ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಾಗುತ್ತಿರುವುದು ಕಂಡುಬಂದಿದೆ.
ತೆರಿಗೆ ಪಾವತಿದಾರರು : ಯೋಜನೆಯ ನಿಯಮಾವಳಿಗಳಿಗೆ ವಿರುದ್ಧವಾಗಿ ತೆರಿಗೆ ಪಾವತಿದಾರರೂ ಈ ಯೋಜನೆಯ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ.
ಈ ರೀತಿಯ ದುರ್ಬಳಕೆಯನ್ನು ತಡೆದು, ಫಲಾನುಭವಿಗಳ ಪಟ್ಟಿಯನ್ನು ಕೇವಲ ‘ಪರಿಷ್ಕರಣೆ’ (ಅರ್ಹರನ್ನಷ್ಟೇ ಉಳಿಸಿಕೊಳ್ಳುವುದು) ಮಾಡಲಾಗುತ್ತಿದೆಯೇ ಹೊರತು, ಯೋಜನೆಯನ್ನು ಸ್ಥಗಿತಗೊಳಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಅವರು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಅಂಕಿ-ಅಂಶಗಳು :
ಒಟ್ಟು ಫಲಾನುಭವಿಗಳು : ಶಿವಮೊಗ್ಗ ಜಿಲ್ಲೆಯೊಂದರಲ್ಲೇ 3,88,029 ಮಹಿಳೆಯರು ಪ್ರತಿ ತಿಂಗಳು 2,000 ರೂ.ಗಳ ಆರ್ಥಿಕ ನೆರವು ಪಡೆಯುತ್ತಿದ್ದಾರೆ.
ಇಲ್ಲಿಯವರೆಗಿನ ನೆರವು : ಯೋಜನೆ ಆರಂಭವಾದ ದಿನದಿಂದ ಇದುವರೆಗೆ ಒಟ್ಟು 30 ಕಂತುಗಳಲ್ಲಿ ಹಣ ಪಾವತಿಯಾಗಿದ್ದು, ಪ್ರತಿ ಫಲಾನುಭವಿ ಮಹಿಳೆಗೆ ತಲಾ 60,000 ರೂ. ತಲುಪಿದೆ.
ಯೋಜನೆಯಲ್ಲಿ ನೈಜತೆಯನ್ನು ಕಾಯ್ದುಕೊಳ್ಳಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ದುರ್ಬಳಕೆ ತಡೆಯಲು ಈ ಕೆಳಗಿನ ಕ್ರಮಗಳನ್ನು ಜಾರಿಗೆ ತರಲು ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮುಂದಾಗಿದ್ದು ಈ ನಿಟ್ಟಿನಲ್ಲಿ ಫಲಾನುಭವಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಜಾರಿಗೊಳಿಸುವುದು ಹಾಗೂ ಪ್ರತಿ ವರ್ಷ ಗೃಹಲಕ್ಷ್ಮಿ ಫಲಾನುಭವಿಗಳಿಂದ ಜೀವಿತ ಪ್ರಮಾಣ ಪತ್ರ ಪಡೆಯುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ ಗಾಂಧೀ ಬಜಾರ್ ನಲ್ಲಿ ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ