
ಶಿವಮೊಗ್ಗ : ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಸಹಕಾರಿ ಸಂಸ್ಥೆಗಳ ಅಡಿಕೆ ಸಾಗಣೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ಅಡಿಕೆ ಸಹಕಾರಿ ನಿಯೋಗವು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಮನವಿ ಸಲ್ಲಿಸಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ನವದೆಹಲಿಯಲ್ಲಿ ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ನಿಯೋಗವು, ಮ್ಯಾಮ್ಕೋಸ್, ಕ್ಯಾಂಪ್ಕೋ, ತುಮ್ಕೋಸ್ ಮತ್ತು ರಾಜ್ಯ ಅಡಿಕೆ ಮಾರುಕಟ್ಟೆ ಸಹಕಾರ ಸಂಘಗಳ ಒಕ್ಕೂಟದ ಪರವಾಗಿ ಬೇಡಿಕೆ ಮಂಡಿಸಿತು.
ದೇಶದ ಒಟ್ಟು ಅಡಿಕೆ ಕೃಷಿಯಲ್ಲಿ ಕರ್ನಾಟಕ ಶೇ.70 ಕ್ಕಿಂತ ಹೆಚ್ಚಿನ ಪಾಲು ಹೊಂದಿದೆ. ಲಕ್ಷಾಂತರ ರೈತ ಕುಟುಂಬಗಳ ಜೀವನಾಧಾರವಾಗಿರುವ ಅಡಿಕೆಯ ಸಾಗಣೆಯನ್ನು ದೀರ್ಘಕಾಲ ತಡೆಹಿಡಿಯುವುದರಿಂದ ಮಾರುಕಟ್ಟೆ ಬೆಲೆಯ ಮೇಲೆ ದುಷ್ಪರಿಣಾಮ ಬೀರುತ್ತದೆ. ಆಧುನಿಕ ಯಾಂತ್ರಿಕ ಸಿಪ್ಪೆ ತೆಗೆಯುವ ಗುರುತುಗಳನ್ನು ನೆಪವಾಗಿಸಿ ಅಡಿಕೆ ಲಾರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಸರಿಯಲ್ಲ. ಸೂಕ್ತ ದಾಖಲೆಗಳಿರುವ ವಾಹನಗಳ ಸುಗಮ ಸಂಚಾರಕ್ಕೆ ಪಾರದರ್ಶಕ ಕಾರ್ಯವಿಧಾನ ಜಾರಿಗೆ ತರಬೇಕು.
– ಬಿ.ವೈ.ರಾಘವೇಂದ್ರ, ಸಂಸದರು
ಇದನ್ನೂ ಓದಿ » ಮಳೆ ಅವಾಂತರ, ನ್ಯೂ ಮಂಡ್ಲಿಯಲ್ಲಿನ ಮನೆ ಕುಸಿದ ಸ್ಥಳಕ್ಕೆ ಶಾಸಕ ಎಸ್.ಎನ್.ಚನ್ನಬಸಪ್ಪ ಭೇಟಿ, ಪರಿಶೀಲನೆ
ಉತ್ತರ ಭಾರತದ ಮಾರುಕಟ್ಟೆಗಳಿಗೆ ತೆರಳಲು ಮಹಾರಾಷ್ಟ್ರದ ಮೂಲಕ ಹಾದುಹೋಗುತ್ತಿದ್ದ, ಜಿಎಸ್ಟಿ ಇನ್ವಾಯ್ಸ್, ಇ-ವೇ ಬಿಲ್ ಹಾಗೂ ಎಫ್ಎಸ್ಎಸ್ಎಐ ನೋಂದಣಿ ಸೇರಿ ಸೂಕ್ತ ದಾಖಲೆಗಳನ್ನು ಹೊಂದಿರುವ ಸುಮಾರು 50ಕ್ಕೂ ಅಧಿಕ ಅಡಿಕೆ ಟ್ರಕ್ಗಳನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರಿಂದ ಅಡಿಕೆ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ನಿಯೋಗ ವಿವರಿಸಿತು.
ನಿಯೋಗದಲ್ಲಿ ತೀರ್ಥಹಳ್ಳಿ ಶಾಸಕ ಹಾಗೂ ಅಡಿಕೆ ಕಾರ್ಯಪಡೆ ಅಧ್ಯಕ್ಷ ಆರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಕೋಟಾ ಶ್ರೀನಿವಾಸ ಪೂಜಾರಿ, ಮ್ಯಾಮ್ಮೋಸ್ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ, ಕ್ಯಾಂಸ್ಕೋ ಮತ್ತು ತುಸ್ಕೋಸ್ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ » ಸಾಗರದಲ್ಲಿ ಕಂಟ್ರೋಲ್ ರೂಂ ಶುರು, ಮಳೆ ಹಾನಿ ಪ್ರದೇಶಗಳಿಗೆ ತಹಶೀಲ್ದಾರ್ ಭೇಟಿ, ಅಧಿಕಾರಿಗಳಿಗೆ ಪ್ರಮುಖ ಸೂಚನೆ