
ಶಿವಮೊಗ್ಗ : ಬಿಡದಿ ರೈತರ ಹೋರಾಟವನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಆ.25 ರಂದು ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ರೈತರು ಕಳೆದ 550 ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ಧೋರಣೆ ಅನುಸ ರಿಸುತ್ತಿದೆ ಎಂದು ಆರೋಪಿಸಿದರು.
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯ ಮೂರ್ತಿ ಜಸ್ಟಿಸ್ ನಾಗಮೋಹನ ದಾಸ್ ನೇತೃತ್ವದಲ್ಲಿ ನಡೆದ ಸಾರ್ವ ಜನಿಕ ವಿಚಾರಣೆಯಲ್ಲಿ ಬಿಡದಿ ಟೌನ್ಶಿಪ್ ಯೋಜನೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಗೆ ಯಾವುದೇ ಕಾನೂನು ತಳಹದಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಅಲ್ಲದೆ, ಇದು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ತೀರ್ಪುಗಳ ಉಲ್ಲಂಘನೆ ಯಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಬಸವರಾಜಪ್ಪ ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜುಲೈ 14 ರಂದು ಪತ್ರಿಕಾಗೋಷ್ಠಿಯಲ್ಲಿ ಸಮಿತಿ ರಚಿಸುವುದಾಗಿ ಘೋಷಿಸಿದ್ದರು. ಆಗಸ್ಟ್ 9ರಂದು ನ್ಯಾಯಮೂರ್ತಿ ಗುರುನಾಥ್ ನರೇಂದ್ರ ನೇತೃತ್ವದ ಸಮಿತಿ ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿ 30 ದಿನಗಳಲ್ಲಿ ವರದಿ ಪಡೆಯುವುದಾಗಿ ತಿಳಿಸಲಾಗಿತ್ತು.ಆದರೆ ಘೋಷಣೆ ಮಾಡಿ ಒಂದೂವರೆ ತಿಂಗಳು ಕಳೆದರೂ ಸರ್ಕಾರದ ಆದೇಶ ಹೊರಬಂದಿಲ್ಲ. ಸಮಿತಿ ಸದಸ್ಯರ ಪಟ್ಟಿ ಬಿಡುಗಡೆಯಾಗಿ 15 ದಿನ ಕಳೆದರೂ ಯಾವುದೇ ಮುಂದಿನ ಕ್ರಮ ಕೈಗೊಂಡಿಲ್ಲ. ಇದು ಉದ್ದೇಶಪೂರ್ವಕ ವಿಳಂಬ ಎಂದು ಅವರು ದೂರಿದರು.
ಬಿಡದಿ ರೈತರ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ಜತೆಗೆ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧವೂ ಬಸವರಾಜಪ್ಪ ವಾಗ್ದಾಳಿ ನಡೆಸಿದರು.’ಬಿಜೆಪಿ ಮತ್ತು ಜೆಡಿಎಸ್ ರಾಜಕೀಯದ ಹೆಸರಿನಲ್ಲಿ ರೈತರಲ್ಲಿ ಒಡಕು ಮೂಡಿಸುತ್ತಿವೆ. ಮೂರೂ ಪಕ್ಷಗಳು ತಮ್ಮ ಲೋಪಗಳನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿವೆಯೇ ಹೊರತು ರೈತರ ಭೂಮಿ ಉಳಿಸಲು ಅರ್ಥಪೂರ್ಣ ಹೋರಾಟ ನಡೆಸುತ್ತಿಲ್ಲ ಎಂದು ಕಿಡಿಕಾರಿದರು.
ರಿಯಲ್ ಎಸ್ಟೇಟ್ ಕಾರ್ಪೊರೇಟ್ಗಳ ಭೂ ಕಬಳಿಕೆಯ ಪ್ರಯತ್ನವನ್ನು ತಡೆಯಲು ಹಾಗೂ ಫಲವತ್ತಾದ ನೀರಾವರಿ ಕೃಷಿ ಭೂಮಿಯನ್ನು ರಕ್ಷಿಸಲು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಬೈರಮಂಗಲ-ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೂ ಹಿತರಕ್ಷಣಾ ಸಂಘದ ಜಂಟಿ ಆಶ್ರಯದಲ್ಲಿ ಚಲೋ ನಡೆಯಲಿದೆ. ರಾಜ್ಯದ ವಿವಿಧ ಭಾಗಗಳಿಂದ ನೂರಾರು ರೈತರು, ಕೂಲಿ ಕಾರ್ಮಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಬಸವರಾಜಪ್ಪ ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಶೇಷಪ್ಪ, ಒಟ್ಟೂರು ರಾಯ, ಹನುಮಮ್ಮ, ಕೆ.ಎಲ್.ಅಶೋಕ್, ಹೆಚ್.ಎಂ.ಜ್ಞಾನೇಶ್, ಇ.ಬಿ.ಜಗದೀಶ್, ಕೆ.ರಾಘವೇಂದ್ರ, ಶೇಖರಪ್ಪ, ಷಣ್ಣುಕಪ್ಪ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.