
ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸತತ ಜನಸೇವೆ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಸೆ.17 ರಂದು ಚಾಲನೆ ನೀಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರದ ಮುಖ್ಯಸ್ಥರಾಗಿ ಸತತ 25 ವರ್ಷಗಳ ಸೇವೆ ಪೂರ್ಣಗೊಳಿಸಿರುವ ನರೇಂದ್ರ ಮೋದಿ ಅವರ ಜನ್ಮದಿನವನ್ನು ಜನಸೇವಾ ಚಳವಳಿಯಾಗಿ ಆಚರಿಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಕರೆ ನೀಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಅಭಿಯಾನ ನಡೆಯುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲೂ ಅದೇ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಗುಜರಾತ್ ಮುಖ್ಯಮಂತ್ರಿಯಾಗಿ 13 ವರ್ಷ ಹಾಗೂ ಪ್ರಧಾನಿಯಾಗಿ 12 ವರ್ಷಗಳ ಆಡಳಿತ ನೀಡಿರುವ ನರೇಂದ್ರ ಮೋದಿ ಅವರು, ನೆಹರು ಅವರ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ ಎಂದು ರಾಘವೇಂದ್ರ ಹೇಳಿದರು. ಪ್ರಧಾನಿ ಹುದ್ದೆಯಲ್ಲಿದ್ದ 12 ವರ್ಷಗಳಲ್ಲಿ 25 ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಮೇಲಕ್ಕೆತ್ತಲಾಗಿದೆ. ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ 80 ಕೋಟಿ ಜನರಿಗೆ ಉಚಿತ ಪಡಿತರ, 12 ಕೋಟಿ ಶೌಚಾಲಯ ಹಾಗೂ 4 ಕೋಟಿಗೂ ಹೆಚ್ಚು ಬಡವರಿಗೆ ಉಚಿತ ಮನೆಗಳನ್ನು ನಿರ್ಮಿಸುವ ಮೂಲಕ ದೇಶದ ಆರ್ಥಿಕ ಬೆಳವಣಿಗೆಗೆ ವೇಗ ನೀಡಲಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸೆ.17 ರಿಂದ ಅ.17 ರವರೆಗೆ ನಡೆಯಲಿರುವ ಈ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ 1,886 ಬೂತ್ಗಳಲ್ಲೂ ವಿವಿಧ ಸೇವಾ ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ವಿಕಸಿತ ಭಾರತ-2047 ಕ್ಕೆ ಶಕ್ತಿ ಕೋರಿ, ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಜನಪರ ಆಡಳಿತ ಮತ್ತು ಸಾಧನೆಗಳಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
– ಬಿ.ವೈ.ರಾಘವೇಂದ್ರ, ಸಂಸದರು
ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಪ್ರಮುಖರಾದ ಶಿವರಾಜ್, ಹರಿಕೃಷ್ಣ, ಎಸ್.ಎಸ್. ಜ್ಯೋತಿಪ್ರಕಾಶ್, ಬಳ್ಳೆಕೆರೆ ಸಂತೋಷ್, ಕೆ.ಜಿ. ಕುಮಾರಸ್ವಾಮಿ, ರಾಜೇಶ್ ಕಾಮತ್, ಜಿಲ್ಲಾ ಮಾಧ್ಯಮ ಪ್ರಮುಖ್ ಚಂದ್ರಶೇಖರ್, ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ಮಂಜುನಾಥ್ ಎನ್. ಸೇರಿದಂತೆ ಹಲವರು ಉಪಸ್ಥಿತರಿದ್ದರು.