
ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಶಿವನ ದರ್ಶನ ಪಡೆದ ಭಕ್ತರು ಭಕ್ತಿಯ ಭಾವದಲ್ಲಿ ಮಿಂದೆದ್ದರು.

ಶಿವನ ದೇವಾಲಯಗಳನ್ನು ಬಣ್ಣದ ದೀಪಗಳಿಂದ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಹಬ್ಬದ ಅಂಗವಾಗಿ ಶಿವಮೊಗ್ಗದ ಶಿವನ ದೇವಾಲಯಗಳಲ್ಲಿ ಭಕ್ತ ಸಾಗರದೇ ನೆರೆದಿತ್ತು. ಬೆಳಗಿನ ಜಾವದಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ನಡೆದವು. ಜಿಲ್ಲೆಯ ಉದ್ದಗಲಕ್ಕೂ ಜನರು ಶಿವನ ದೇವಾಲಯಗಳಿಗೆ ತೆರಳಿ, ಶಿವನ ದರ್ಶನ ಪಡೆಯುವ ಮೂಲಕ ಶಿವರಾತ್ರಿ ಹಬ್ಬವನ್ನು ಆಚರಿಸಿದರು.
ಹರಕೆರೆಯ ಶಿವನ ದೇವಸ್ಥಾನದಲ್ಲಿ ಮುಂಜಾನೆ ಶಿವನಿಗೆ ಅಭಿಷೇಕ ಹಾಗೂ ವಿಶೇಷ ಪೂಜೆಗಳ ವೈಭವ ನಡೆಯಿತು. ವಿಶೇಷ ಪೂಜೆ, ಪುನಸ್ಕಾರ ಮತ್ತು ಬಿಲ್ವ ಪತ್ರೆ, ತುಂಬೆ ಅರ್ಪಣೆ, ಮಹಾ ಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರಿಗೆ ವಿಶೇಷ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ಇಲ್ಲಿ ತುಂಗಾ ನದಿಯಲ್ಲಿ ಸ್ನಾನ ಮಾಡಿ ನಂತರ ಶಿವನ ದರ್ಶನ ಮಾಡಲಾಗುತ್ತದೆ. ಹಬ್ಬದ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿ ಸೇರುತ್ತಾರೆ. ಸಾಲಿನಲ್ಲಿ ಶಿವನ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಹರಕೆರೆ ಶಿವನ ದೇವಾಲಯದ ಶಿವರಾತ್ರಿ ಐತಿಹಾಸಿಕ ಮಹತ್ವ ಪಡೆದಿದೆ. ಭಕ್ತರು ಬಿಸಿಲನ್ನು ಲೆಕ್ಕಿಸದೆ ಉದ್ದದ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಹೊಳೆಹೊನ್ನೂರು ರಸ್ತೆಯ ಶ್ರೀ ಅರಕೇಶ್ವರ ದೇವಸ್ಥಾನದಲ್ಲಿ ಮುಂಜಾನೆ ಶಿವನಿಗೆ ಅಭಿಷೇಕ ಹಾಗೂ ವಿಶೇಷ ಪೂಜೆಗಳ ವೈಭವ ನಡೆಯಿತು. ವಿಶೇಷ ಪೂಜೆ, ಪುನಸ್ಕಾರ ಮತ್ತು ಬಿಲ್ವ ಪತ್ರೆ, ತುಂಬೆ ಅರ್ಪಣೆ, ಮಹಾ ಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರಿಗೆ ವಿಶೇಷ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಹಬ್ಬದ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಇಲ್ಲಿ ಸೇರುತ್ತಾರೆ.

ವಿನೋಬ ನಗರದ ಶಿವನ ದೇವಾಲಯದಲ್ಲಿ ವಿಶೇಷವಾಗಿ ಪೂಜೆ ಹಮ್ಮಿಕೊಳ್ಳಲಾಗಿತ್ತು. ಭಕ್ತರು ದೇವಸ್ಥಾನಕ್ಕೆ ಗುಂಪು ಗುಂಪಾಗಿ ಪೂಜೆಗೆ ಬರುತ್ತಿರುವ ದೃಶ್ಯ ಕಂಡುಬಂತು. ಮಹಿಳೆಯರು ಅತ್ಯಂತ ಸಡಗರದಿಂದ ಮತ್ತು ಶ್ರದ್ದಾಭಕ್ತಿಯಿಂದ ಶಿವನ ಆರಾಧಿಸುವ ದೃಶ್ಯ ಸಾಮಾನ್ಯವಾಗಿತ್ತು.
ಅಬ್ಬಲಗೆರೆ ಸಮೀಪದ ಈಶ್ವರವನದಲ್ಲಿ ವನದಲ್ಲಿ ವಿಶೇಷ ಶಿವರಾತ್ರಿ ಆಚರಿಸಲಾಯಿತು.
ಕೋಟೆ ಭೀಮೇಶ್ವರ ದೇವಾಲಯದಲ್ಲಿ ವಿಶೇಷವಾಗಿ ಶಿವನ ಪೂಜೆ ನಡೆಯಿತು. ಬೆಳಿಗ್ಗೆಯಿಂದಲೇ ಭಕ್ತರು ನೂರಾರು ಸಂಖ್ಯೆಯಲ್ಲಿ ಸೇರಿ ಈಶ್ವರನ ದರ್ಶನ ಪಡೆದು ಪುನೀತರಾದರು. ನದಿಯ ದಂಡೆಯ ಮೇಲೆ ಈಶ್ವರ ದೇವಾಲಯ ಇರುವುದು ಇಲ್ಲಿನ ವಿಶೇಷವಾಗಿದೆ.
ಅದೇ ರೀತಿ ನಗರದ ಎಲ್ಲ ದೇವಾಲಯಗಳಲ್ಲಿ ಭಕ್ತರ ಜಂಗುಳಿ ಕಂಡುಬಂದಿತು. ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಶಿವನ ದೇಗುಲಗಳಲ್ಲದೆ ಎಲ್ಲ ದೇವಾಲಯಗಳಲ್ಲಿ ಬೆಳೆಗಿನಿಂದಲೇ ವಿಶೇಷ ಪೂಜೆ ಅಭಿಷೇಕ ನಡೆಯಿತು.
ಭಕ್ತರಿಗೆ ಪಾನಕ ಮತ್ತು ಕೋಸಂಬರಿ ಹಂಚಲಾಯಿತು. ಹಬ್ಬದ ಅಂಗವಾಗಿ ಕಲ್ಲಂಗಡಿ ಹಣ್ಣು, ಬನಸ್ಪತ್ರೆ, ಕರಬೂಜ ಮೊದಲಾದ ಹಣ್ಣುಗಳ ಖರೀದಿ ಜೋರಾಗಿತ್ತು. ಇವುಗಳೊಂದಿಗೆ ಹೂವು, ಪೂಜಾ ಸಾಮಗ್ರಿಗಳು ಹಾಗೂ ವಿವಿಧ ಹಣ್ಣುಗಳ ಮಾರಾಟವೂ ಜೋರಾಗಿತ್ತು.
ಇದನ್ನೂ ಓದಿ » ಶ್ರೀ ಅರಕೇಶ್ವರ ದೇವಸ್ಥಾನದಲ್ಲಿ ವೈಭವದ ಶಿವರಾತ್ರಿ ಸಂಭ್ರಮ