
ಶಿವಮೊಗ್ಗ : ತಾಲೂಕಿನ ಪುರದಾಳು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ ಮತ್ತು ಮಕ್ಕಳ ವಿಶೇಷ ಗ್ರಾಮ ಸಭೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು,
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್.ಆರ್.ಗಿರೀಶ್ ರವರು, ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಯಿಸುವ ಉದ್ದೇಶದಿಂದ 2021-22 ನೇ ಸಾಲಿನಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು ಮಕ್ಕಳು ಇದರ ಸದುಪಯೋಗ ಪಡೆದುಕೊಂಡು ಯಶಸ್ಸು ಸಾಧಿಸಬೇಕು. ಮಕ್ಕಳು ವಿದ್ಯಾವಂತರಾಗಿ, ಬುದ್ದಿವಂತರಾಗಿ ಸಮಾಜದ ಮುಖ್ಯ ವಾಹಿನಿಗೆ ಬಂದು ಈ ದೇಶದ ಅಭಿವೃದ್ಧಿಯಲ್ಲಿ ತಮ್ಮ ಕೊಡುಗೆ ನೀಡಬೇಕೆಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರದೀಪ್ ಎಸ್. ಹೆಬ್ಬೂರ್ ರವರು ಪ್ರಾಸ್ತವಿಕವಾಗಿ ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ನಾಡಿನ ಭವಿಷ್ಯ ಇಂದಿನ ವಿದ್ಯಾರ್ಥಿಗಳ ಮೇಲೆ ನಿಂತಿದೆ, ಮಕ್ಕಳು ತಮ್ಮ ಹಕ್ಕುಗಳನ್ನು ಅನುಭವಿಸುವುದರ ಜೊತೆಗೆ ಸಮಾಜದಲ್ಲಿ ಸುಸಂಸ್ಕೃತ ಪ್ರಜೆಗಳಾಗಿ ಹೊರಹೊಮ್ಮಬೇಕು. ಆ ಮೂಲಕ ಸಮಾಜದ ಸಾಮಾಜಿಕ ಪಿಡುಗುಗಳನ್ನು ತೊಲಗಿಸಿ ಸಮ ಸಮಾಜ ನಿರ್ಮಾಣದ ಪಣ ತೊಡಬೇಕು. ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದು ಯಶಸ್ಸು ಸಾಧಿಸಬೇಕೆಂದರು.

ಪುರದಾಳು ಗ್ರಾಮ ಪಂಚಾಯತ್ ಮತ್ತು ಸರ್ಕಾರದ ಯೋಜನೆ ಕಾನೂನುಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಸೀಗೆಹಟ್ಟಿ ವಲಯದ ವೈದ್ಯಾಧಿಕಾರಿಗಳು ಆರೋಗ್ಯ ಸಲಹೆಗಳನ್ನು ನೀಡಿದರು. ಶಿವಮೊಗ್ಗ ತಾಲ್ಲೂಕ್ ಪಂಚಾಯತ್ ಸಹಾಯಕ ನಿರ್ದೇಶಕ ಸಂತೋಷ ನೋಡೆಲ್ ಅಧಿಕಾರಿಯಾಗಿ ಭಾಗಿಯಾಗಿದ್ದರು.
ಸಮಾರಂಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಭಾರತಿ ನಾಗರಾಜ್, ಸದಸ್ಯರಾದ ಮಾನಸ ಸತೀಶ್, ಜಿ.ರಾಮಣ್ಣ, ವೈ.ಕುಸುಮ, ಕಮಲಕ್ಷಿ, ಲಕ್ಷ್ಮೀ ಬಾಯಿ, ಪಿ ಡಿ ಓ ಪರಮೇಶ್ವರ್.ಎಸ್.ಜಿ, ಪುರದಾಳು ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಗಿರೀಶ್, ಮಹಿಳಾ ಮತ್ತು ಮಕ್ಕಳ ಇಲಾಖೆಯ ಮೇಲ್ವಿಚಾರಕರು, ಎಲ್ಲಾ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ 2024-2025 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.85 ಕ್ಕೂ ಹೆಚ್ಚಿನ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಮತ್ತು ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸಿದ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಟ್ಟು 34 ಅಭ್ಯರ್ಥಿಗಳಿಗಳನ್ನು ಅಭಿನಂದಿಸಿ ಸನ್ಮಾನಿಸಿ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಂಭ್ರಮ ಮೂಡಿಸಿದ ವೈಕುಂಠ ಏಕಾದಶಿ, ಇಲ್ಲಿದೆ ಫೋಟೋ ಸಮೇತ ಮಾಹಿತಿ