
ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಆಗಸ್ಟ್ 03 ರಂದು ನಗರದ ಕುವೆಂಪು ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ 18 ಜಿಲ್ಲೆಗಳಲ್ಲಿ ಪ್ರತಿಭಾ ಪುರಸ್ಕಾರವನ್ನು ಪೂರ್ಣಗೊಳಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ 400 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ರೂ.1,500 ಗಳ ನಗದು, ಸ್ಮರಣಿಕೆ, ಬ್ಯಾಗ್ ಹಾಗೂ ಪುಸ್ತಕವನ್ನು ನೀಡಲಾಗುವುದು. ಪ್ರತಿ ವರ್ಷ ಈ ಪ್ರತಿಭಾ ಪುರಸ್ಕಾರಕ್ಕಾಗಿ 3 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ ⇒ ವ್ಯಾಘ್ರ ಗಾಂಭೀರ್ಯ ನಡೆ ಬಲು ಆಕರ್ಷಣೀಯ….
ನಾನು ಸರ್ಕಾರಿ ನೌಕರರ ಸಂಘದ ಅಧ್ಯಕ್ಷನಾದ ನಂತರ 2019 ರಿಂದ ಈ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳುತ್ತಿದ್ದೇವೆ. ಇದು 6ನೇ ವರ್ಷದ ಕಾರ್ಯಕ್ರಮವಾಗಿದ್ದು, ಇದೂವರೆಗೆ 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿದ್ದೇವೆ.
| ಸಿ.ಎಸ್.ಷಡಾಕ್ಷರಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಉದ್ಘಾಟಿಸಲಿದ್ದು, ಸಂಸದ ಬಿ.ವೈ.ರಾಘವೇಂದ್ರ ಪ್ರತಿಭಾ ಪುರಸ್ಕಾರವನ್ನು ವಿತರಿಸಲಿದ್ದಾರೆ. ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಮತ್ತು ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾ ನಾಯ್ಕ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ವಹಿಸಲಿದ್ದು, ಟಿವಿ 9 ನ ಚೀಫ್ ಆಂಕರ್ ರಂಗನಾಥ ಭಾರದ್ವಾಜ್ ಪ್ರೇರಣಾ ನುಡಿಗಳನ್ನಾಡಲಿದ್ದಾರೆ. ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್ ಉಪಸ್ಥಿತರಿರಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಎಂಎಲ್ಸಿಗಳಾದ ಡಿ.ಎಸ್.ಅರುಣ್, ಬಲ್ಕಿಶ್ ಬಾನು, ಡಾ. ಧನಂಜಯ ಸರ್ಜಿ, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಸಿಇಒ ಹೇಮಂತ್, ಎಸ್.ಪಿ. ಮಿಥುನ್ ಕುಮಾರ್, ಹಾಗೂ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರು ಆಗಮಿಸಲಿದ್ದಾರೆ ಎಂದು ತಿಳಿಸಿದರು.