
ಶಿವಮೊಗ್ಗ : ವಂದೇ ಮಾತರಂ ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದರ ಜತೆಗೆ, ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಜನಾಂದೋಲನ ರೂಪಿಸಲಾಗುವುದು ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಎರಡು ಚರಣಗಳಿಗೆ ಸೀಮಿತಗೊಳಿಸಿರುವುದನ್ನು ವಿರೋಧಿಸಿ ಕಾರ್ಯಕ್ರಮದಿಂದ ಹೊರಬಂದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ನಡೆಯನ್ನು ಒಪ್ಪುವುದಿಲ್ಲ ಎಂದರು.
ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು : ಚೆನ್ನಿ
ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ಸಂಬಂಧಿಸಿದ ವಿಚಾರಗಳಲ್ಲಿ ಸರ್ಕಾರ ದ್ವಂದ್ವ ನಿಲುವು ತಾಳಬಾರದು. ವಂದೇ ಮಾತರಂನಂತಹ ರಾಷ್ಟ್ರೀಯ ಭಾವನೆಯೊಂದಿಗೆ ಬೆಸೆದುಕೊಂಡಿರುವ ಗೀತೆಗೆ ಗೌರವ ಸಲ್ಲಿಸುವ ವಿಚಾರದಲ್ಲಿ ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು.
– ಎಸ್.ಎನ್. ಚನ್ನಬಸಪ್ಪ, ಶಿವಮೊಗ್ಗ ನಗರ ಶಾಸಕರು
ಸರ್ಕಾರದ ಆದೇಶದ ಹೆಸರಿನಲ್ಲಿ ವಂದೇ ಮಾತರಂ ಗಾಯನವನ್ನು ಸೀಮಿತಗೊಳಿಸಿರುವುದು ಸರಿಯಲ್ಲ ಎಂದು ಆರೋಪಿಸಿದ ಅವರು, ಈ ವಿಚಾರವನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲೂ ಪ್ರಸ್ತಾಪಿಸಲಾಗುವುದು. ಅಗತ್ಯವಿದ್ದರೆ ಬೀದಿ ಹೋರಾಟದ ಜತೆಗೆ ಕಾನೂನು ಹೋರಾಟವನ್ನೂ ತೀವ್ರಗೊಳಿಸುವುದಾಗಿ ಹೇಳಿದರು.
“ರಾಜಕಾರಣಕ್ಕಾಗಿ ಅಲ್ಲ; ಸಂವಿಧಾನ, ಕಾನೂನು ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಈ ಹೋರಾಟ” ಎಂದು ಚನ್ನಬಸಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಎನ್.ಕೆ. ಜಗದೀಶ್, ಬಿಜೆಪಿ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ, ನಗರ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ನವುಲೆ ಹಾಗೂ ದೀನದಯಾಳು, ಮಹಾನಗರ ಪಾಲಿಕೆಯ ಉಪ ಮಹಾಪೌರರಾದ ಸುರೇಖಾ ಮುರಳೀಧರ್, ಮಾಜಿ ಪಾಲಿಕೆ ಸದಸ್ಯರಾದ ಪ್ರಭಾಕರ್, ನಗರ ಪದಾಧಿಕಾರಿಗಳಾದ ಪರಮೇಶ್ ನಾಯಕ್, ಗಡಿಕೊಪ್ಪ ಕುಮಾರ್, ಜಗದೀಶ್, ಯಶೋದಾ, ಶ್ರೀನಾಗ್ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ » ‘ವಂದೇ ಮಾತರಂ’ ಗಾಯನದ ವಿಚಾರ: ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಿಂದ ಶಾಸಕ ಚನ್ನಬಸಪ್ಪ ವಾಕ್ಔಟ್